ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಅವ್ಯವಹಾರ ಪ್ರಕರಣ ಹಿನ್ನೆಲೆಯಲ್ಲಿ ರಾಜ್ಯ ಭೋವಿ ನಿಗಮದ ಕಚೇರಿ ಮೇಲೆ ಸಿಐಡಿ ಪೊಲೀಸರು ಮಂಗಳವಾರ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ಜಪ್ತಿ ಮಾಡಿದ್ದಾರೆ. ಪ್ರಕರಣ ಸಂಬಂಧ ಸಿಐಡಿ ನಡೆಸಿದ ಮೊದಲ ದಾಳಿ ಇದಾಗಿದೆ. ನಗರದ ಸರ್.ಎಂ.ವಿಶ್ವೇಶ್ವರಯ್ಯ ಗೋಪುರದಲ್ಲಿರುವ ಭೋವಿ ನಿಗಮದ ಕಚೇರಿ ಮೇಲೆ ದಿಢೀರ್ ದಾಳಿ ನಡೆಸಿ ಸುಮಾರು 3 ತಾಸುಗಳು ಸಿಐಡಿ ಜಾಲಾಡಿದೆ. ಈ ವೇಳೆ ಅಕ್ರಮ ವ್ಯವಹಾರಕ್ಕೆ ಸಂಬಂಧಿಸಿದ ಕೆಲ ದಾಖಲೆಗಳು ಪತ್ತೆಯಾಗಿವೆಂದು ತಿಳಿದು ಬಂದಿದೆ.
ಮೂರು ವರ್ಷಗಳ ಹಿಂದೆ ಸಾಲ ಮಂಜೂರಾತಿ ಹೆಸರಿನಲ್ಲಿ ಭೋವಿ ನಿಗಮದಲ್ಲಿ ಸುಮಾರು 60 ಕೋಟಿ ರುಪಾಯಿಗೂ ಅಧಿಕ ಹಣವನ್ನು ನಿಗಮದ ಅಧಿಕಾರಿಗಳು ಹಾಗೂ ಮಧ್ಯವರ್ತಿಗಳು ದೋಚಿದ್ದಾರೆ ಎಂಬ ಆರೋಪವಿದೆ. ಇದೇ ಪ್ರಕರಣದಲ್ಲಿ ನಿಗಮದ ಕಚೇರಿ ಅಧೀಕ್ಷಕ ಪಿ.ಡಿ.ಸುಬ್ಬಪ್ಪ ಅವರನ್ನು ಸಿಐಡಿ ಬಂಧಿಸಿತ್ತು. ಇನ್ನು ತಲೆಮರೆಸಿಕೊಂಡಿರುವ ನಿಗಮದ ಪ್ರಧಾನ ವ್ಯವಸ್ಥಾಪಕ ನಿರ್ದೇಶಕ ಕೆ.ವಿ.ನಾಗರಾಜಪ್ಪ, ವ್ಯವಸ್ಥಾಪಕಿ ಲೀಲಾವತಿ ಹಾಗೂ 20ಕ್ಕೂ ಮಧ್ಯವರ್ತಿಗಳಿಗೆ ಹುಡುಕಾಟ ನಡೆಸಿದೆ.