ದೆಹಲಿ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರನ್ನು ವಿಚಾರಣೆಗೆ ಒಳಪಡಿಸಲು ಕೇಂದ್ರ ಗೃಹ ಸಚಿವಾಲಯ, ಜಾರಿ ನಿರ್ದೇಶನಾಲಯಕ್ಕೆ(ಇಡಿ) ಅನುಮತಿ ನೀಡಿದೆ.
ಕೇಂದ್ರ ತನಿಖಾ ಸಂಸ್ಥೆಯು 56 ವರ್ಷದ ರಾಜಕಾರಣಿಯ ವಿರುದ್ಧ ಕಳೆದ ವರ್ಷದ ಮಾರ್ಚ್ನಲ್ಲಿ ಬಂಧಿಸಿದ ನಂತರ ಅವರ ವಿರುದ್ಧ ವಿಶೇಷ ಹಣ ವರ್ಗಾವಣೆ ತಡೆ ಕಾಯ್ದೆ ನ್ಯಾಯಾಲಯದ ಮುಂದೆ ಆರೋಪಪಟ್ಟಿ ಸಲ್ಲಿಸಿದೆ.
ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ತಡೆ ಕಾನೂನಿನಡಿಯಲ್ಲಿ ಕೇಜ್ರಿವಾಲ್ ಅವರನ್ನು ವಿಚಾರಣೆಗೆ ಒಳಪಡಿಸಲು ಕೇಂದ್ರ ಗೃಹ ಸಚಿವಾಲಯ (ಎಂಎಚ್ಎ) ಇತ್ತೀಚೆಗೆ ಇಡಿಗೆ ಅಗತ್ಯವಾದ ಅನುಮತಿಯನ್ನು ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಫೆಬ್ರವರಿ 5 ರಂದು ನಿಗದಿಯಾಗಿರುವ ದೆಹಲಿ ವಿಧಾನಸಭೆ ಚುನಾವಣೆಗೂ ಮುನ್ನ ಈ ಬೆಳವಣಿಗೆ ನಡೆದಿದೆ. ಮಾಜಿ ಮುಖ್ಯಮಂತ್ರಿಯನ್ನು ದೆಹಲಿ ಅಬಕಾರಿ “ಹಗರಣ”ದ “ಪ್ರಮುಖ ಆರೋಪಿ ಮತ್ತು ಪ್ರಮುಖ ಸಂಚುಕೋರ” ಎಂದು ಇಡಿ ಕರೆದಿದೆ. ದೆಹಲಿ ಸರ್ಕಾರದ ಸಚಿವರು, ಎಎಪಿ ನಾಯಕರು ಮತ್ತು ಇತರರೊಂದಿಗೆ ಕೇಜ್ರಿವಾಲ್ ಅವರು ಶಾಮೀಲಾಗಿದ್ದಾರೆ ಎಂದು ಇಡಿ ಆರೋಪಿಸಿದೆ.
ಸಾರ್ವಜನಿಕ ಸೇವಕರನ್ನು ವಿಚಾರಣೆಗೆ ಒಳಪಡಿಸುವ ಮೊದಲು ಇಡಿ ಪೂರ್ವಾನುಮತಿ ತೆಗೆದುಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಕಳೆದ ನವೆಂಬರ್ ನಲ್ಲಿ ನೀಡಿದ ಆದೇಶದಲ್ಲಿ ಹೇಳಿತ್ತು. ಇದರ ಬೆನ್ನಲ್ಲೇ ಡಿಸೆಂಬರ್ 5ರಂದು ಜಾರಿ ನಿರ್ದೇಶನಾಲಯ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರಿಗೆ ಪತ್ರ ಬರೆದಿದ್ದು, ಕೇಜ್ರಿವಾಲ್ ಹಗರಣದ ಪ್ರಮುಖ ಸಂಚುಕೋರ ಆಗಿರುವುದರಿಂದ ವಿಚಾರಣೆಗೆ ಅನುಮತಿ ನೀಡಬೇಕು ಎಂದು ಕೇಳಿಕೊಂಡಿತ್ತು. ಇದಕ್ಕೆ ದಿಲ್ಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಒಪ್ಪಿಗೆ ನೀಡಿದ್ದರು. ಇದೀಗ ಕೇಂದ್ರ ಗೃಹ ಸಚಿವಾಲಯವು ಕೇಜ್ರಿವಾಲ್ ಅವರನ್ನು ವಿಚಾರಣೆಗೆ ಒಳಪಡಿಸಲು ಅನುಮತಿ ನೀಡಿದೆ.