ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ವಿಕೋಪಕ್ಕೆ ತಿರುಗಿದ್ದು, ರಾಜ್ಯದ 29 ಜಿಲ್ಲೆಗಳ 16.50 ಲಕ್ಷ ಮಂದಿ ತೊಂದರೆಗೊಳಗಾಗಿದ್ದಾರೆ. ರಾಜ್ಯದಾದ್ಯಂತ ಎಲ್ಲ ನದಿಗಳು ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿವೆ ಎಂದು ಅಧಿಕೃತ ವರದಿಗಳು ತಿಳಿಸಿವೆ. ಕಾಮರೂಪಿ ಜಿಲ್ಲೆಯ ಬ್ರಹ್ಮಪುತ್ರ, ದಿಗರು ಹಾಗೂ ಕೊಲ್ಲಾಂಗ್ ನದಿಗಳು ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿರುವುದರಿಂದ ಜನವಸತಿ ಹಾಗೂ ಕೃಷಿ ಭೂಮಿಗಳು ಜಲಾವೃತವಾಗಿವೆ.
ಪರಿಸ್ಥಿತಿಯ ಗಂಭೀರತೆಯನ್ನು ಅರಿಯಲು ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಅವರು ಗುವಾಹಟಿಯ ಪ್ರವಾಹ ಪೀಡಿತ ಪ್ರದೇಶಗಳಾದ ಮಲಿಗಾವ್, ಪಂಡು ಬಂದರು ಹಾಗೂ ದೇಗುಲ ಘಟ್ಟಗಳ ಪ್ರದೇಶಗಳಿಗೆ ಭೇಟಿ ನೀಡಲಿದ್ದು, ನಿಯಮಾವಳಿಗಳ ಪ್ರಕಾರ ಪರಿಹಾರ ನೀಡಬೇಕೆಂದು ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ. ಮುಂದಿನ ಮೂರು ದಿನಗಳಲ್ಲಿ ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಸಂಪುಟ ದರ್ಜೆ ಸಚಿವರು ವಾಸ್ತವ್ಯ ಹೂಡಲಿದ್ದಾರೆ.
ಅಸ್ಸಾಂನಲ್ಲಿ ಪ್ರವಾಹ, ಭೂಕುಸಿತ ಹಾಗೂ ಚಂಡಮಾರುತದಿಂದ ಸಾವಿನ ಸಂಖ್ಯೆ 56ಕ್ಕೆ ಏರಿಕೆಯಾಗಿದೆ. ದಿಬ್ರು ಅತ್ಯಂತ ಹೆಚ್ಚು ತೊಂದರೆಗೊಳಗಾದ ಜಿಲ್ಲೆಯಾಗಿದ್ದು, 2.23 ಲಕ್ಷ ಮಂದಿ ಅಪಾಯದ ಸ್ಥಿತಿ ಎದುರಿಸುತ್ತಿದ್ದಾರೆ. ದರಾಂಗ್ನಲ್ಲಿ 1.84 ಲಕ್ಷ ಹಾಗೂ ಲಕೀಂಪುರದಲ್ಲಿ 1.66 ಲಕ್ಷ ಜನರಿಗೆ ತೊಂದರೆಯಾಗಿದೆ.