ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಗಳ ಅಭಿವೃದ್ಧಿ ಪರಿಷತ್ನ ಸಭೆ ನಡೆಸಿದ್ದು, ಈ ಸಭೆಯಲ್ಲಿ ಕೆಲ ಮಹತ್ವದ ನಿರ್ಣಯ ಕೈಗೊಂಡಿದ್ದಾರೆ.
ಐಎಎಸ್, ಐಆರ್ಎಸ್ ಸೇರಿ ಮತ್ತಿತರೆ ಸ್ಪರ್ಧಾತ್ಮಕ ಪರೀಕ್ಷೆ ಸಿದ್ದತೆಗಳಿಗಾಗಿ ದೆಹಲಿಯಲ್ಲಿ ಎಸ್ಸಿ, ಎಸ್ಟಿ ಮಕ್ಕಳಿಗೆ ಉತ್ತಮ ಹಾಸ್ಟೆಲ್ ಕಟ್ಟಿಸುವ ಜೊತೆಗೆ ತಿಂಗಳಿಗೆ 15 ಸಾವಿರ ರೂಪಾಯಿ ಕೊಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದಾರೆ. ಸದ್ಯ 10 ಸಾವಿರ ಕೊಡಲಾಗುತ್ತಿದ್ದು, ಇದೀಗ ಅದನ್ನು 15 ಸಾವಿರ ಹೆಚ್ಚಿಸಲಾಗುವುದು. ಈ ಸಂಬಂಧ ತಕ್ಷಣ ಆದೇಶ ಹೊರಡಿಸಲಾಗುವುದು ಎಂದು ಸಿ.ಎಂ. ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
- 2024-25 ನೇ ಸಾಲಿಗೆ scsp/tsp ನಲ್ಲಿ ಲಭ್ಯ ಇರುವ ಹಣವನ್ನು ಖರ್ಚು ಮಾಡಲು ಕಾರ್ಯಯೋಜನೆಗೆ ಅನುಮೋದನೆ ಮಾಡಲಾಗಿದೆ. ರಾಜ್ಯದ ಅಭಿವೃದ್ಧಿ ಆಯವ್ಯಯ ಈ ಸಾಲಿನಲ್ಲಿ ಒಟ್ಟು 1,60,000 ಕೋಟಿ. ಇದರಲ್ಲಿ scsp/tsp ಗೆ ಸುಮಾರು 39,121.46 ಕೋಟಿ scsp/tsp ಅಡಿ 34 ಇಲಾಖೆಗಳಿಗೆ ಹಂಚಿಕೆ ಮಾಡಿರುವ ಹಣ ಕಾರ್ಯಯೋಜನೆಯಲ್ಲಿದೆ.
- ಹಿಂದಿನ ವರ್ಷ 97.81 ಕೋಟಿ ಉಳಿತಾಯವಾಗಿದೆ. ಈ ಹಣವೂ ಸೇರಿದೆ. ಕಳೆದ ವರ್ಷಕ್ಕಿಂತ ಈ ವರ್ಷ 3,900 ಕೋಟಿ ಹೆಚ್ಚಾಗಿದೆ. ಈ ಹಣ ಇಲಾಖೆಗಳಿಗೆ ಹಂಚಿಕೆಯಾಗಿದ್ದು ಇದರ ಸದುಪಯೋಗ ಆಗಬೇಕು. ಸಮಾಜ ಕಲ್ಯಾಣ ಇಲಾಖೆ, ನಿಗಮಗಳು ಕಾಯ್ದೆಯ ಉದ್ದೇಶಕ್ಕೆ ಪೂರಕವಾಗಿ ಕೆಲಸ ಮಾಡಬೇಕು. ಶೇ100 ಸಾಧನೆ ಆಗಬೇಕು. ಇದರಲ್ಲಿ ನಿರ್ಲಕ್ಷ್ಯ ಮಾಡಿದವರ ಮೇಲೆ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಸಿಎಂ ಹೇಳಿದರು.
- ಖಾಲಿ ಇರುವ ಹೋಬಳಿಗಳಲ್ಲೂ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು ಆರಂಭಿಸಲೇಬೇಕು. ಆಯಾ ಹೋಬಳಿಯ ವಿದ್ಯಾರ್ಥಿಗಳಿಗೆ ಶೇ75 ರಷ್ಟು ಸೀಟು, ಉಳಿದ ಶೇ25 ರಷ್ಟು ಸೀಟುಗಳನ್ನು ಇತರೆ ಪ್ರದೇಶದ ವಿಧ್ಯಾರ್ಥಿಗಳಿಗೆ ವಸತಿ ಶಾಲೆಗಳಲ್ಲಿ ನೀಡಬೇಕು.
- ಬಜೆಟ್ ನಲ್ಲಿ ನಾವು ಘೋಷಿಸಿರುವ ಎಲ್ಲಾ ಕಾರ್ಯಕ್ರಮಗಳನ್ನೂ ಜಾರಿ ಮಾಡಲೇಬೇಕು. ಆಶ್ರಮ ಶಾಲೆಗಳಲ್ಲಿ ರಾತ್ರಿ ವೇಳೆ ಮಕ್ಕಳನ್ನು ಮನೆಗೆ ಕರೆದುಕೊಂಡು ಹೋಗುತ್ತಾರೆ ಎನ್ನುವುದು ಕಂಡುಬಂದಿದೆ. ಇದಕ್ಕೆ ಅವಕಾಶ ಆಗಬಾರದು. ಮನೆಗೆ ಕರೆದೊಯ್ಯದಂತೆ ಪೋಷಕರಿಗೆ ಒಪ್ಪಿಸಬೇಕು.
- ಹಳ್ಳಿಗಾಡು, ಬಡ ಕುಟುಂಬಗಳಿಗೆ ಸರ್ಕಾರದಿಂದ ಬರುವ ಸವಲತ್ತುಗಳನ್ನು ಸರಿಯಾಗಿ ತಲುಪಿಸಬೇಕು. ಇದರಲ್ಲಿ ವಿಫಲರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ನಾವು ಕೊಟ್ಟ ಅನುದಾನ ಆಯಾ ಉದ್ದೇಶಗಳಿಗೇ ಬಳಕೆಯಾಗಬೇಕು. ಇದರಲ್ಲಿ ಯಾವುದೇ ರಾಜಿ ಇಲ್ಲದಂತೆ ಆಯಾ ಸಮುದಾಯಗಳಿಗೆ ಸವಲತ್ತು ತಲುಪಿಸಬೇಕು.
- ಹಾಸ್ಟೆಲ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸದಿದ್ದರೆ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗುವುದು. 10 ವರ್ಷದಲ್ಲಿ ಈ ಯೋಜನೆಯಿಂದ ಸಮುದಾಯದ ಮೇಲೆ ಬೀರಿರುವ ಪರಿಣಾಮ, ಸಮುದಾಯಕ್ಕೆ ಯೋಜನೆ ತಲುಪಿರುವ ಪ್ರಮಾಣದ ಬಗ್ಗೆ, ಹಾಗೂ ಅವರ ಆರ್ಥಿಕ ಸ್ಥಿತಿ ಪ್ರಗತಿ ಆಗಿರುವ ಬಗ್ಗೆ ಮೌಲ್ಯಮಾಪನ ಮಾಡಲಾಗುವುದು.
- 3 ತಿಂಗಳ ಬಳಿಕ ಮತ್ತೊಮ್ಮೆ ಪರಿಷತ್ ಸಭೆ ಕರೆಯುತ್ತೇವೆ. ಯಾರಿಂದ ಲೋಪ ಆಗಿದೆ ಎಂದು ಗೊತ್ತಾದರೆ ಅವರ ಮೇಲೆ ಕ್ರಮ ಕೈಗೊಳ್ಳಲಾಗುವುದು. ಈ ವರ್ಷದ ಕಾರ್ಯಯೋಜನೆಯನ್ನು ಈ ಸಭೆಯಲ್ಲಿ ಶಾಸಕರು/ಸಚಿವರು/ ಅಧಿಕಾರಿಗಳು ನೀಡಿದ ಸಲಹೆಗಳ ಸಮೇತ ಜಾರಿ ಆಗಬೇಕು ಎನ್ನುವ ಸೂಚನೆಯನ್ನು ಮುಖ್ಯಮಂತ್ರಿಗಳು ನೀಡಿದರು.