ಗುತ್ತಿಗೆದಾರರ ಸಂಘದ ಅಧ್ಯಕ್ಷರಾಗಿದ್ದ ಕೆಂಪಣ್ಣ ಅವರ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ ಸೂಚಿಸಿದರು. “ಕೆಂಪಣ್ಣ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ ಎಂಬ ಸುದ್ದಿ ನೋವುಂಟುಮಾಡಿದೆ. ಸದಾ ಕ್ರಿಯಾಶೀಲರಾಗಿ ಇರುತ್ತಿದ್ದ ಅವರ ಸಾವು ಗುತ್ತಿಗೆದಾರರ ಹೋರಾಟ ಮತ್ತು ದನಿಗೆ ತುಂಬಲಾರದ ನಷ್ಟ.
ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ 40% ಕಮಿಷನ್ ವಿರುದ್ಧ ದನಿ ಎತ್ತಿದ್ದರು. ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡಿದ ಕಾರಣಕ್ಕೆ ಇಳಿ ವಯಸ್ಸಿನಲ್ಲೂ ಪೊಲೀಸ್ ಸ್ಟೇಷನ್ ಮೆಟ್ಟಿಲು ಹತ್ತಿದ್ದರು. ಇಳಿ ವಯಸ್ಸಿನಲ್ಲೂ ಅತ್ಯಂತ ಕ್ರಿಯಾಶೀಲವಾಗಿದ್ದ ಕೆಂಪಣ್ಣ ಅವರು ನನ್ನ ಬಳಿ ಗುತ್ತಿಗೆದಾರರ ಸಮಸ್ಯೆಗಳನ್ನು ಇಟ್ಟುಕೊಂಡು ಅನೇಕ ಬಾರಿ ಚರ್ಚೆ ನಡೆಸಿದ್ದರು.
ಈ ಹಿರಿಯ ಜೀವದ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬ ವರ್ಗಕ್ಕೆ, ಬಂಧು, ಬಳಗದವರಿಗೆ ಈ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.