ಬಿಟ್ ಕಾಯಿನ್ ಕೇಸ್ನಲ್ಲಿ ಆರೋಪಿಗಳಿಗೆ ಸಹಾಯ ಆರೋಪ ಎದುರಿಸುತ್ತಿರುವ ಡಿವೈಎಸ್ಪಿ ಶ್ರೀಧರ್ ಕೆ. ಪೂಜಾರ್ಗೆ ಬಿಗ್ ರಿಲೀಫ್ ಸಿಕ್ಕಿದೆ. ಘೋಷಿತ ಆರೋಪಿ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ವಿಚಾರಣೆಗೆ ಸಹಕರಿಸದೇ ಇದ್ದ ಹಿನ್ನೆಲೆ ವಿಚಾರಣಾ ನ್ಯಾಯಾಲಯದಿಂದ ಘೋಷಿತ ಆರೋಪಿ ಎಂದು ವಾರೆಂಟ್ ಜಾರಿ ಮಾಡಲಾಗಿತ್ತು. ವಾರೆಂಟ್ ಪ್ರಶ್ನಿಸಿ ಇತ್ತೀಚೆಗೆ ಶ್ರೀಧರ್ ಕೆ. ಪೂಜಾರ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಆರೋಪಿ ತನಿಖೆಗೆ ಸಹಕರಿಸುವುದಾಗಿ ಹಿರಿಯ ವಕೀಲ ಅರುಣ್ ಶ್ಯಾಮ್ ಭರವಸೆ ನೀಡಿದ್ದಾರೆ.. ಮೇ 8 ರಂದು ತನಿಖಾಧಿಕಾರಿಗಳ ಮುಂದೆ ಹಾಜರಾಗಬೇಕು ಹಾಗೂ ಕಸ್ಟಡಿಗೆ ಪಡೆದು ತನಿಖೆ ನಡೆಸಬೇಕು. ನಂತರ 2 ಲಕ್ಷ ರೂ. ಬಾಂಡ್ ಪಡೆದು ಬಿಡುಗಡೆ ಮಾಡಬೇಕು. ಪೊಲೀಸರ ತನಿಖೆಗೆ ಆರೋಪಿ ಶ್ರೀಧರ್ ಕೆ. ಪೂಜಾರ್ ಸಹಕರಿಸಬೇಕು. ಜಾಮೀನು ಅರ್ಜಿ ಸಲ್ಲಿಸಿದ್ದರೆ ಪೊಲೀಸರು ಆಕ್ಷೇಪಿಸಬಾರದು ಎಂದು ನ್ಯಾ.ವಿ. ಶ್ರೀಶಾನಂದ ಅವರಿದ್ದ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ.