ಕಳೆದ ಲೋಕಸಭಾ ಚಹುನಾವಣೆಯಲ್ಲಿ ಕುಮಾರಸ್ವಾಮಿ ಗೆದ್ದ ನಂತರ ಖಾಲಿ ಉಳಿದಿರುವ ಚೆನ್ನಪಟ್ಟಣ ವಿಧಾನಸಭಾ ಉಪಚುನಾವಣೆಯ ಅಖಾಡ ರಂಗೇರಿಗೆ. ಬಿಜೆಪಿ ಜೆಡಿಎಸ್ ಮೈತ್ರಿಯಿಂದ ಟಿಕೆಟ್ ಆಕಾಂಕ್ಷಿಯಾಗಿ ಸಿ.ಪಿ. ಯೋಗೇಶ್ವರ್ ಮುನ್ನೆಲೆಯಲ್ಲಿದ್ದಾರೆ. ಟಿಕೆಟ್ ಕೈತಪ್ಪಿದರೆ ಪಕ್ಷೇತರವಾಗಿ ಸ್ಪರ್ಧೆ ಮಾಡುತ್ತೇನೆ ಎಂದು ವಿಧಾನಪರಿಷತ್ ಬಿಜೆಪಿ ಸದಸ್ಯ ಸಿ. ಪಿ ಯೋಗೇಶ್ವರ್ ಎಚ್ಚರಿಕೆ ನೀಡಿದ್ದಾರೆ. ಚನ್ನಪಟ್ಟಣದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ಅವರನ್ನು ಬಿಜೆಪಿ ಹೈಕಮಾಂಡ್ ಮಾತುಕತೆಗೆ ಬರುವಂತೆ ದೆಹಲಿಗೆ ಕರೆದಿದೆ.
ಆ ಹಿನ್ನೆಲೆಯಲ್ಲಿ ಇಂದು ಅವರು ದೆಹಲಿಗೆ ತೆರಳಿದ್ದಾರೆ. ಬೆಂಗಳೂರಿನಿಂದ ವಿಮಾನ ಪ್ರಯಾಣ ಮಾಡುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಟಿಕೆಟ್ ವಿಚಾರವಾಗಿ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಇದಕ್ಕೆ ಒಪ್ಪದೇ ಇದ್ದರೆ ಮುಂದಿನ ದಾರಿ ನೋಡೋಣ’’ ಎಂದು ಹೇಳಿದರು. ಇದೇ ವೇಳೆ, ‘ಚನ್ನಪಟ್ಟಣ ಟಿಕೆಟ್ ಸಿಗದಿದ್ರೆ ಪಕ್ಷೇತರನಾಗಿ ಸ್ಪರ್ಧೆ ಮಾಡುತ್ತೀರಾ?’ ಎಂಬ ಪ್ರಶ್ನೆಗೆ, “ಹೌದು ಪಕ್ಷೇತರನಾಗಿ ಮತ್ತೆ ಗೆದ್ದು ಎನ್ಡಿಎ ಭಾಗವಾಗ್ತೇನೆ. ನೋಡೋಣ ಮುಂದೆ ಏನೇನು ರಾಜಕೀಯ ತಿರುವು ಪಡ್ಕೊಳ್ಳುತ್ತದೆ’’ ಎಂದರು. ಈ ಮೂಲಕ ಬಂಡಾಯದ ಸುಳಿವನ್ನು ನೀಡಿದ್ದಾರೆ.
ಇದೇ ವೇಳೆ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಯೋಗೇಶ್ವರ್ ಅವರು ಕಾಂಗ್ರೆಸ್ ಸೇರುವ ಸಾಧ್ಯತೆಗಳಿವೆ ಎಂದು ಹೇಳಿದ್ದಕ್ಕೆ ಟಾಂಗ್ ನೀಡಿದ ಅವರು, “ನಾನು ಕಾಂಗ್ರೆಸ್ ಗೆ ಹೋಗುವ ಬಗ್ಗೆ ಆಲೋಚನೆ ಮಾಡಿಲ್ಲ. ಯಾರೂ ನನ್ನ ಮಾತಾಡಿಸಿಯೂ ಇಲ್ಲ. ಡಿಕೆಶಿ ಅವರು ಏನೇನೋ ಮಾತಾಡ್ತಾರೆ, ಅದು ಅವರ ರಾಜಕೀಯ ತಂತ್ರಗಾರಿಕೆ. ಅವರಿಗೆ ಯಾವಾಗ ಏನು ಮಾತಾಡಬೇಕು ಅಂತ ಗೊತ್ತಿದೆ’’ ಎಂದರು. ಅಲ್ಲದೆ, “ನನ್ನ ತಾಲ್ಲೂಕಿನ ಜನ ನನ್ನ ಮೇಲೆ ವಿಶ್ವಾಸ ಇಟ್ಟಿದ್ದಾರೆ, ಯಾವುದೇ ಚಿಹ್ನೆಯಡಿ ನಿಂತರೂ ಗೆಲ್ಲಿಸುತ್ತಾರೆ. ಕ್ಷೇತ್ರದ ಸಮಾನ ಮನಸ್ಕರ ವೇದಿಕೆಯಿಂದಲೂ ಸ್ಪರ್ಧೆಗೆ ಒತ್ತಾಯ ಇದೆ’’ ಎಂದೂ ತಿಳಿಸಿದರು.