ವಾಲ್ಮೀಕಿ ನಿಗಮದ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಚಿವ ಬಿ.ನಾಗೇಂದ್ರ ಅವರ ಹೆಸರು ಹೇಳುವಂತೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಇ.ಡಿ. ಅಧಿಕಾರಿಗಳ ಕಾಂಗ್ರೆಸ್ ಸರ್ಕಾರದ ಪ್ರತಿಭಟನೆ ನಡೆಸಿದೆ. ವಿಧಾನಸೌಧದ ಮುಂಭಾಗದ ಗಾಂಧಿ ಪ್ರತಿಮೆ ಬಳಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ನೇತೃತ್ವದಲ್ಲಿ ಇಡೀ ಕಾಂಗ್ರೆಸ್ ಪಡೆಯೇ ಇಡಿ ವಿರುದ್ಧ ತೊಡೆ ತಟ್ಟಿದೆ. ವಾಲ್ಮೀಕಿ ಕೇಸ್ನಲ್ಲಿ ಬಂಧಿಸಿರುವ ಅಧಿಕಾರಿ ಕಲ್ಲೇಶ್ಗೆ ಇಡಿ ಅಧಿಕಾರಿಗಳು ಒತ್ತಡ ಹೇರಿದ್ದಾರೆ, ಸಿಎಂ, ಡಿಸಿಎಂ, ನಾಗೇಂದ್ರ ಹೆಸರು ಹೇಳುವಂತೆ ಇಡಿ ಕಿರುಕುಳ ಕೊಡುತ್ತಿದೆ ಎಂದು ಕಾಂಗ್ರೆಸ್ ಸರ್ಕಾರ ಆರೋಪ ಮಾಡಿದೆ. ಇಡಿ ಕಿರುಕುಳ ವಿರುದ್ಧ ವಿಲ್ಸನ್ ಗಾರ್ಡನ್ ಠಾಣೆಯಲ್ಲಿ ರಾಜ್ಯ ಸಮಾಜ ಕಲ್ಯಾಣ ಇಲಾಖೆಯ ಅಪರ ನಿರ್ದೇಶಕರು ನೀಡಿದ ದೂರು ಆಧರಿಸಿ ಮಂಗಳವಾರ ಎಫ್ಐಆರ್ ದಾಖಲಾಗಿದೆ. ಇದೇ ಮೊದಲ ಸಲ ರಾಜ್ಯದಲ್ಲಿ ಕೇಂದ್ರ ಸರ್ಕಾರಿ ಸ್ವಾಮ್ಯದ ತನಿಖಾ ಸಂಸ್ಥೆಯೊಂದರ ವಿರುದ್ಧ ಕೇಸ್ ದಾಖಲಾದಂತಾಗಿದೆ. ಕೇಂದ್ರ ಸರ್ಕಾರ ಇಡಿ, ಸಿಬಿಐ, ಐಟಿ ಇಲಾಖೆಗಳನ್ನು ದುರ್ಬಳಕೆ ಮಾಡಿಕೊಳ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಇ.ಡಿ ಅಧಿಕಾರಿಗಳನ್ನು ಬಂಧಿಸಬೇಕು, ಪ್ರಧಾನಿ ಮೋದಿ, ಅಮಿತ್ ಶಾ ರಾಜೀನಾಮೆ ಕೊಡಬೇಕು ಎಂದು ಪ್ಲಕಾರ್ಡ್ ಹಿಡಿದು ಕಾಂಗ್ರೆಸ್ ಕಲಿಗಳು ಪ್ರತಿಭಟನೆ ನಡೆಸಿದರು.