ನವೆಂಬರ್ 13 ರಂದು ಕರ್ನಾಟಕದ ಮೂರು ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಶಿಗ್ಗಾಂವಿ, ಸಂಡೂರು ಮತ್ತು ಚನ್ನಪಟ್ಟಣ ವಿಧಾಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಮೂರು ಕ್ಷೇತ್ರಗಳಲ್ಲಿ ವಿಜಯಪತಾಕೆ ಹಾರಿಸಲು ಎನ್ಡಿಎ ಮತ್ತು ಕಾಂಗ್ರೆಸ್ ಎರಡೂ ರಾಷ್ಟ್ರೀಯ ಪಕ್ಷಗಳು ತಾಲೀಮು ನಡೆಸಿವೆ.
ಬುಧವಾರ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣಗೋಪಾಲ್ ರಾಜ್ಯಕ್ಕೆ ಆಗಮಿಸಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಜೊತೆ ಸಭೆ ನಡೆಸಿ, ಮೂರು ಕ್ಷೇತ್ರಗಳಲ್ಲಿ ಗೆಲ್ಲಲು ಮಾಡಬೇಕಾದ ರಣತಂತ್ರದ ಬಗ್ಗೆ ಚರ್ಚಿಸಿದರು. ಎನ್ಡಿಎ ತನ್ನ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡುವವರೆಗೆ ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡದಿರಲು ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಮೂಲಗಳಿಂದ ಮಾಹಿತಿ ದೊರೆತಿದೆ.
![](https://guaranteenews.com/wp-content/uploads/2024/10/WhatsApp-Image-2024-10-16-at-6.08.16-PM-1024x692.jpeg)
ಮೂವರು ನಾಯಕರು ಸಂಭಾವ್ಯ ಅಭ್ಯರ್ಥಿಗಳು ಮತ್ತು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರೊಂದಿಗೆ ವೀಡಿಯೊ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು. ಚನ್ನಪಟ್ಟಣ ಕ್ಷೇತ್ರಕ್ಕೆ ಡಿಕೆ ಶಿವಕುಮಾರ್ ಅವರ ಸಹೋದರ ಡಿಕೆ ಸುರೇಶ್ ಅವರನ್ನೇ ಕಣಕ್ಕೆ ಇಳಿಸುವಂತೆ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಅಭಿಪ್ರಾಯ ವ್ಯಕ್ತಪಡಿಸಿದರು ಎಂದು ಮೂಲಗಳು ತಿಳಿಸಿವೆ. ಎನ್ಡಿಎ ಟಿಕೆಟ್ ನಿರಾಕರಿಸಿದರೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಬಿಜೆಪಿ ನಾಯಕ ಸಿಪಿ ಯೋಗೇಶ್ವರ್ ಅವರ ನಡೆಯ ಬಗ್ಗೆಯೂ ಚರ್ಚಿಸಲಾಗಿದೆ.
![Some BJP leaders involved in adjustment politics, alleges C P Yogeshwar](https://guaranteenews.com/wp-content/uploads/2024/10/image-53.jpeg)
ಸಂಡೂರಿಗೆ ಬಳ್ಳಾರಿ ಸಂಸದ ಇ ತುಕಾರಾಂ ಅವರ ಕುಟುಂಬದ ಒಬ್ಬರಿಗೆ ಟಿಕೆಟ್ ನೀಡಲು ತೀರ್ಮಾನಿಸಲಾಗಿದೆ. ಬಿಜೆಪಿ ಮಾಜಿ ಸಚಿವ ಬಿ.ಶ್ರೀರಾಮುಲು ಅವರಿಗೆ ಟಿಕೆಟ್ ಘೋಷಿಸಿದರೆ, ಕಾಂಗ್ರೆಸ್ ತುಕಾರಾಂ ಅವರ ಪತ್ನಿ ಇ ಅನ್ನಪೂರ್ಣ ಅವರನ್ನು ಕಣಕ್ಕಿಳಿಸಬಹುದು, ಇಲ್ಲದಿದ್ದರೆ ಅವರ ಪುತ್ರಿ ಸೌಪರ್ಣಿಕಾ ಅವರನ್ನು ಸ್ಪರ್ಧಿಸುವಂತೆ ಮಾಡುವ ಆಲೋಚನೆ ಇದೆ.
ಮೂರೂ ಸೀಟು ಗೆಲ್ಲುವುದು ಪಕ್ಷಕ್ಕೆ ಮಹತ್ವದ್ದಾಗಿದ್ದರೂ ತುಕಾರಾಂ ಈ ಹಿಂದೆ ಸ್ಥಾನ ಪಡೆದಿದ್ದರಿಂದ ಸಂಡೂರಿನತ್ತ ಹೆಚ್ಚಿನ ಗಮನ ಹರಿಸಲಾಗಿದೆ. ಎರಡು ಮೂರು ದಿನಗಳಲ್ಲಿ ಸಂಡೂರಿನ ಅಭ್ಯರ್ಥಿಯನ್ನು ಅಂತಿಮಗೊಳಿಸಲು ನಾಯಕರು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮುಡಾ ಮತ್ತು ವಾಲ್ಮೀಕಿ ಹಗರಣಗಳ ಬಗ್ಗೆ ಬಿಜೆಪಿ ಉಪಚುನಾವಣೆ ಪ್ರಚಾರದ ಸಮಯ ಪ್ರಸ್ತಾಪಿಸುವ ಸಾಧ್ಯತೆ ಇದೆ. ಅದನ್ನು ಹೇಗೆ ಎದುರಿಸಬೇಕು ಎಂಬುದರ ಕುರಿತು ಮಾತುಕತೆ ನಡೆಸಲಾಗಿದೆ.
ಸಚಿವರಾದ ಸತೀಶ್ ಜಾರಕಿಹೊಳಿ, ಡಾ.ಜಿ.ಪರಮೇಶ್ವರ ಮತ್ತು ಡಾ.ಎಚ್.ಸಿ ಮಹದೇವಪ್ಪ ಅವರು ನಡೆಸಿದ ಪ್ರತ್ಯೇಕ ಸಭೆ ಮತ್ತು ಸಿದ್ದರಾಮಯ್ಯ ಸಿಎಂ ಸ್ಥಾನದಿಂದ ಕೆಳಗಿಳಿಯುವ ಬಗ್ಗೆ ರಾಜಕೀಯ ವಲಯದಲ್ಲಿ ಮಾತುಗಳು ಕೇಳಿ ಬರುತ್ತಿರುವ ಬಗ್ಗೆಯೂ ಚರ್ಚಿಸಲಾಗಿದೆ. ಮೂರು ಕ್ಷೇತ್ರಗಳಿಗೆ ಹೋಬಳಿ ಮಟ್ಟದಲ್ಲಿ ಸಚಿವರನ್ನು ಚುನಾವಣೆಗೆ ನಿಯೋಜಿಸಿ. ಸಚಿವರ ನಡುವಿನ ರಹಸ್ಯ ಸಭೆಗಳನ್ನು ತಡೆಯಿರಿ. ಪಕ್ಷದ ಆಂತರಿಕ ಗೊಂದಲಗಳು ಉಪ ಚುನಾವಣೆಗೆ ಪರಿಣಾಮ ಬೀರದಂತೆ ಎಚ್ಚರ ವಹಿಸಬೇಕು ಎಂದು ಕೆ.ಸಿ ವೇಣುಗೋಪಾಲ್ ಸೂಚಿಸಿದ್ದಾರೆ.