ಕೇರಳದ ವಯನಾಡ್ ಜಿಲ್ಲೆಯ ಮೆಪ್ಪಾಡಿ ಬಳಿ ಭೀಕರ ಗುಡ್ಡ ಕುಸಿತದಿಂದ 43 ಜನ ಸಾವನ್ನಪ್ಪಿದ್ದು, ಕ್ಷಣ ಕ್ಷಣಕ್ಕೂ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ನೂರಾರು ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಮೊದಲ ಭೂಕುಸಿತವು ಮಧ್ಯರಾತ್ರಿ ಸುಮಾರು 2 ಗಂಟೆಗೆ ಪ್ರದೇಶಕ್ಕೆ ಅಪ್ಪಳಿಸಿತು. ವಿವರಗಳ ಪ್ರಕಾರ, ಜಿಲ್ಲೆಯಲ್ಲಿ ಮುಂಜಾನೆ 4.10 ರ ಸುಮಾರಿಗೆ ಮತ್ತೊಂದು ಭೂಕುಸಿತ ಸಂಭವಿಸಿದೆ.
ವಯನಾಡ್ ಜಿಲ್ಲೆಯ ಅಧಿಕಾರಿಗಳ ಪ್ರಕಾರ, ತೊಂಡರ್ನಾಡ್ ಗ್ರಾಮದಲ್ಲಿ ವಾಸಿಸುವ ನೇಪಾಳಿ ಕುಟುಂಬದ ಒಂದು ವರ್ಷದ ಮಗು ಭೂಕುಸಿತವೊಂದರಲ್ಲಿ ಸಾವನ್ನಪ್ಪಿದೆ. ಭಾರೀ ಭೂಕುಸಿತದ ಹಿನ್ನೆಲೆಯಲ್ಲಿ ಭಾರತೀಯ ಸೇನೆ, ಎಲ್ಲಾ ಸರ್ಕಾರಿ ಸಂಸ್ಥೆಗಳು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಹೇಳಿದ್ದಾರೆ. ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ತಂಡಗಳನ್ನು ಪೀಡಿತ ಪ್ರದೇಶಕ್ಕೆ ನಿಯೋಜಿಸಲಾಗಿದೆ.
ಎನ್ಡಿಆರ್ಎಫ್ನ ಹೆಚ್ಚುವರಿ ತಂಡ ವಯನಾಡ್ಗೆ ತೆರಳುತ್ತಿದೆ. ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ವಯನಾಡ್ಗೆ ತೆರಳಿದೆ. ಆರೋಗ್ಯ ಇಲಾಖೆ, ರಾಷ್ಟ್ರೀಯ ಆರೋಗ್ಯ ಮಿಷನ್, ನಿಯಂತ್ರಣ ಕೊಠಡಿಯನ್ನು ತೆರೆದಿದೆ ಎಂದು ಅವರು ಹೇಳಿದರು. ತುರ್ತು ಸಹಾಯದ ಅಗತ್ಯವಿರುವವರು ಈ ಸಂಖ್ಯೆಗಳ ಮೂಲಕ ಅಧಿಕಾರಿಗಳನ್ನು ಸಂಪರ್ಕಿಸಬಹುದು, 9656938689 ಮತ್ತು 8086010833. ಎರಡು IAF ಹೆಲಿಕಾಪ್ಟರ್ಗಳು Mi-17 ಮತ್ತು ALH ರಕ್ಷಣಾ ಕಾರ್ಯಾಚರಣೆಗೆ ಸಹಾಯ ಮಾಡಲು ಸೂಲೂರಿನಿಂದ ಹೊರಟಿವೆ. ಆದರೆ ನಿರಂತರ ಮಳೆಯಿಂದಾಗಿ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ. ಏತನ್ಮಧ್ಯೆ, ಮುಂದಿನ 3 ಗಂಟೆಗಳಲ್ಲಿ ಕೇರಳ, ಮಹಾರಾಷ್ಟ್ರ, ಮತ್ತು ಲಕ್ಷದ್ವೀಪಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.