ಕರ್ನಾಟಕ-ತಮಿಳುನಾಡು ರಾಜ್ಯಗಳ ನಡುವಿನ ಜಲ ವಿವಾದವಿದು. ಅಂತಾರಾಜ್ಯ ಪೆನ್ನಾರ್ ನದಿ ನೀರು ಹಂಚಿಕೆ ವಿವಾದ ಕುರಿತು ವರದಿ ಸಲ್ಲಿಸಲು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಕರ್ನಾಟಕ- ತಮಿಳುನಾಡು ನಡುವಿನ ಪೆನ್ನಾರ್ ನದಿ ನೀರು ಹಂಚಿಕೆ ಕುರಿತು 8 ವಾರ ಗಳಲ್ಲಿ ವರದಿ ಸಲ್ಲಿಸುವಂತೆ ನ್ಯಾ.ಹೃಷಿಕೇಶ್ ರಾಮ್, ನ್ಯಾ.ಹಿಮಾ ಕೊಯ್ಲಿ ಪೀಠ ಕೇಂದ್ರಕ್ಕೆ ಸೂಚಿಸಿದೆ. ಎರಡು ರಾಜ್ಯಗಳ ನಡುವಿನ ಸಮಸ್ಯೆಯನ್ನು ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳುತ್ತೇವೆ ನಮಗೆ ಸಮಯ ನೀಡಿ. ಅಲ್ಲಿಯವರೆಗೂ ನ್ಯಾಯಾಧೀಕರಣ ರಚಿಸಬೇಡಿ ಎಂದು ಕರ್ನಾಟಕ ಮನವಿ ಮಾಡಿತ್ತು. ಇದೇ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಕೂಡ ಸಮಯ ನೀಡಿತ್ತು. ಕೇಂದ್ರ ಸರ್ಕಾರದ ಪರ ವಾದ ಮಂಡಿಸಿದ ವಕೀಲರು, ಈ ವಿಷಯದಲ್ಲಿ ಒಟ್ಟು 5 ಸಮಾಲೋಚನಾ ಸಭೆಗಳನ್ನು ನಡೆಸಿ, ಸ್ಥಳಕ್ಕೆ ಖುದ್ದು ಭೇಟಿ ನೀಡಿ ಸಮಿತಿ ಪರಿಶೀಲನೆ ನಡೆಸಿದೆ. ಆದರೆ, ವರದಿ ಸಲ್ಲಿಸಲು ಇನ್ನಷ್ಟು ಕಾಲಾವಕಾಶ ಬೇಕು ಎಂದರು. ಎರಡೂ ಕಡೆಯ ವಾದಗಳನ್ನು ಆಲಿಸಿದ ನ್ಯಾಯಪೀಠ 8 ವಾರ ವಿಚಾರಣೆ ಮುಂದೂಡಿದೆ.