ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಗರಣಕ್ಕಿಂತ ವಾಲ್ಮೀಕಿ ನಿಗಮದ ಹಗರಣ ದೊಡ್ಡದು. ವಾಲ್ಮೀಕಿ ನಿಗಮದ ಹಗರಣ, ಎಸ್ಸಿಎಸ್ಪಿ, ಟಿಎಸ್ಪಿ ಹಣವನ್ನು ಗ್ಯಾರಂಟಿಗೆ ಬಳಸಿದ್ದಾರೆ. ಇದನ್ನು ಖಂಡಿಸಿ ಕೂಡಲಸಂಗಮದಿಂದ ಬಳ್ಳಾರಿವರೆಗೆ ಪಾದಯಾತ್ರೆಗೆ ಸಿದ್ಧರಿದ್ದೇವೆ. ಪಾದಯಾತ್ರೆ ಬಗ್ಗೆ ಹೈಕಮಾಂಡ್ನಿಂದ ಅನುಮತಿ ಕೇಳಿದ್ದೇವೆ ಎಂದು ಶಾಸಕ ರಮೇಶ್ ಜಾರಕಿಹೊಳಿ ಹೇಳಿದರು. ಗೋಕಾಕ್ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಅವರು, ವಾಲ್ಮೀಕಿ ಸಮುದಾಯಕ್ಕೆ ರಾಜ್ಯ ಸರ್ಕಾರ ಮೋಸ ಮಾಡಿದೆ. ಬಿಜೆಪಿ ಹೈಕಮಾಂಡ್ ಒಪ್ಪಿಗೆ ನೀಡಿದರೇ ನಾನು, ಬಸನಗೌಡ ಪಾಟೀಲ್ ಯತ್ನಾಳ್ ಪಾದಯಾತ್ರೆ ಮಾಡಲು ಸಿದ್ದರಿದ್ದೇವೆ ಎಂದರು.
ಸದನದಲ್ಲಿ ಗಲಾಟೆ ಮಾಡಿದರೆ ಸಾಲಲ್ಲ, ಪಾದಯಾತ್ರೆ ಮಾಡಬೇಕು. ಬಳ್ಳಾರಿ ಪಾದಯಾತ್ರೆಗೆ ಇನ್ನೂ ದಿನಾಂಕ ನಿಗದಿಯಾಗಿಲ್ಲ. ಪಾದಯಾತ್ರೆ ಬಗ್ಗೆ ರಾಜ್ಯ ಬಿಜೆಪಿ ಅಧ್ಯಕ್ಷರ ಜೊತೆ ಮಾತನಾಡಲ್ಲ. ನಾನೇನಿದ್ದರೂ ಹೈಕಮಾಂಡ್ ಜೊತೆ ಮಾತನಾಡ್ತೇನೆ. ಪಾದಯಾತ್ರೆಗೆ ರಾಜ್ಯ ಬಿಜೆಪಿ ಅಧ್ಯಕ್ಷರು ಒಪ್ಪಿಲ್ಲ, ಒಪ್ಪುವುದೂ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಅಸಮಾಧಾನ ಹೊರ ಹಾಕಿದರು. ಮುಡಾ ಹಗರಣ ಖಂಡಿಸಿ ರಾಜ್ಯ ಬಿಜೆಪಿ ನಾಯಕರು ಬೆಂಗಳೂರಿನಿಂದ-ಮೈಸೂರುವರೆಗು ಪಾದಯಾತ್ರೆ ಮಾಡಲು ನಿರ್ಧರಿಸಿದ್ದಾರೆ. ಆದರೆ ಇತ್ತ, ರಮೇಶ್ ಜಾರಕಿಹೊಳಿ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ಪ್ರತ್ಯೇಕ ಪಾದಾಯಾತ್ರೆ ಮಾಡಲು ನಿರ್ಧಿಸಿದ್ದು ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ.