ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಬಹುಕೋಟಿ ಹಗರಣದಲ್ಲಿ ತನಿಖೆಗಿಳಿದಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮಾಜಿ ಸಚಿವ ಬಿ ನಾಗೇಂದ್ರ ಅವರನ್ನು ವಶಕ್ಕೆ ಪಡೆದುಕೊಂಡಿದೆ. ಬೆಂಗಳೂರಿನಲ್ಲಿರುವ ನಾಗೇಂದ್ರ ಅವರ ನಿವಾಸದಿಂದ ಈಡಿ ಅಧಿಕಾರಿಗಳು ವಶಕ್ಕೆ ಪಡೆದು ಶಾಂತಿನಗರದಲ್ಲಿರುವ ಈಡಿ ಕಚೇರಿಗೆ ಕರೆತಂದಿದ್ದಾರೆ ಎನ್ನಲಾಗಿದೆ. ಈ ವೇಳೆ ನಾಗೇಂದ್ರರ ಪ್ರತಿಕ್ರಿಯೆ ಪಡೆಯಲು ಮಾಧ್ಯಮ ಪ್ರತಿನಿಧಿಗಳು ಪ್ರಯತ್ನಿಸಿದರಾದರೂ ಅಧಿಕಾರಗಳ ಎಳೆದಾಟದಲ್ಲಿ ಪ್ರತಿಕ್ರಿಯಿಸಲು ಸಾಧ್ಯವಾಗಲಿಲ್ಲ.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಪಿ ಚಂದ್ರಶೇಖರನ್ ಅವರ ಆತ್ಮಹತ್ಯೆಯ ಬಳಿಕ 187 ಕೋಟಿ ರೂಪಾಯಿ ಮೊತ್ತದ ಬೃಹತ್ ಹಗರಣ ಬಯಲಿಗೆ ಬಂದಿತ್ತು. ಸಚಿವರಾಗಿದ್ದಾಗ ₹ 94 ಕೋಟಿ ಹಣವನ್ನು ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ಬೇರೆ ಬೇರೆ ಖಾತೆಗಳಿಗೆ ವರ್ಗಾಯಿಸುವಂತೆ ಆದೇಶ ನೀಡಿದ ಆರೋಪ ನಾಗೇಂದ್ರ ಅವರ ಮೇಲಿದೆ. ಈಗಾಗಲೇ ಜಾರಿ ನಿರ್ದೇಶನಾಲಯ ನಾಗೇಂದ್ರ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿತ್ತು.